ಕರ್ನಾಟಕ ಕಾಂಗ್ರೆಸ್‌ ಎಂಬ ಕುರುಸೇನೆ

ನಂಬಿ ಹಿಡಿದರೆ ನದಿಯ ಮಗ ಹಗೆಯ ಅಂಬಿಗಿಟ್ಟ ಕಾಯವನು
ಸುತ ಸತ್ತ ನೆಪದಲಿ ಧನುವ ಬಿಸುಟನು ಗರಡಿಯಾಚಾರ್ಯ
ಅಂಬು ಬೆಸನವ ಬೇಡಿದರೆ ತೊಡನೆಂಬ ಛಲ ನಿನಗಾಯ್ತು
ಮೂವರ ನಂಬಿ ಕೌರವ ಕೆಟ್ಟ ಅಕಟಕಟೆಂದನಾ ಶಲ್ಯ

ಇದು ಕರ್ಣಪರ್ವ ಯಕ್ಷಗಾನ ಪ್ರಸಂಗದ ಒಂದು ಪದ್ಯ. ತಮ್ಮೆಲ್ಲಾ ಪರಾಕ್ರಮಗಳನ್ನೂ ಕೃಷ್ಣನ `ಆಪರೇಷನ್‌’ಗಳಿಗೆ ಬಲಿಕೊಟ್ಟ ಕುರುಸೇನೆಯ ಅತಿರಥ ಮಹಾರಥರ ಕುರಿತು ಶಲ್ಯ ಆಡಿಕೊಳ್ಳುವುದನ್ನು ಈ ಪದ್ಯ ವಿವರಿಸುತ್ತದೆ. Continue reading

Posted in ಒಂಟಿದನಿ (ಉದಯವಾಣಿ ಅಂಕಣ) | Leave a comment

ಮೆಟ್ಟಿಲುಗಳಿಲ್ಲದ ಬಹು ಅಂತಸ್ತಿನ ಕಟ್ಟಡ

ಈಗ ಮುಖ್ಯಮಂತ್ರಿಯಾಗಿರುವ ಯಡಿಯೂರಪ್ಪನವರು ಸಾಮಾನ್ಯ ರೈತನ ಮಗ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸೇರಿ ಆ ಮೂಲಕ ಬಿಜೆಪಿಯಲ್ಲಿ ದುಡಿದು ಪಕ್ಷವನ್ನು ಬೆಳಸುತ್ತಲೇ ತಾವೂ ಬೆಳೆದವರು. ಇದನ್ನು ಹೇಳಿಕೊಳ್ಳುವುದಕ್ಕೆ ಯಡಿಯೂರಪ್ಪನವರು ಹೆಮ್ಮೆ ಪಡುತ್ತಾರೆ. ತಮ್ಮ ರೈತ ಹೋರಾಟದ ಕಥನವನ್ನು ಜನರ ಮುಂದಿಟ್ಟೇ ಅವರು ಓಟು ಕೇಳುತ್ತಾರೆ. Continue reading

Posted in ಒಂಟಿದನಿ (ಉದಯವಾಣಿ ಅಂಕಣ), ಲೇಖನಗಳು | 2 Comments

ತನಿಖೆ ಎಂಬ ಥಳಿಸುವಿಕೆ

ಇದು 1985ರ ಬಿಹಾರ ಕೇಡರ್‌ನ ಐಎಎಸ್‌ ಅಧಿಕಾರಿಯೊಬ್ಬರು ಹೇಳಿದ ಕತೆ.

`ನಾನು ಸೇವೆಗೆ ಸೇರಿದ ಹೊಸತರಲ್ಲಿ ನನ್ನ ಮನೆಯಿಂದ ಕೆಲ ವಸ್ತುಗಳು ಕಳವಾದವು. ಪೊಲೀಸರಿಗೆ ದೂರು ನೀಡಿದೆ. ತನಿಖೆ ಆರಂಭವಾಯಿತು. ನಾನು ಸಮಯಸಿಕ್ಕಾಗಲೆಲ್ಲಾ ಠಾಣೆಗೆ ಹೋಗಿ ನನ್ನ ದೂರಿನ ಕುರಿತು ವಿಚಾರಿಸುತ್ತಿದ್ದೆ. ಪ್ರತೀ ಬಾರಿ ಹೋದಾಗಲೂ ಪೊಲೀಸರು `ಇನ್ವೆಸ್ಟಿಗೇಷನ್‌ ಮಾಡುತ್ತಿದ್ದೇವೆ ಸಾರ್‌’ ಎಂದು ಯಾರಾದರೊಬ್ಬನಿಗೆ ಥಳಿಸುತ್ತಿರುತ್ತಿದ್ದರು. `ನಾನು ಠಾಣೆಗೆ ಹೋದ ದಿನ ನನ್ನನ್ನು ಮೆಚ್ಚಿಸುವುಕ್ಕೋ ಎಂಬಂತೆ ಅವರ ಥಳಿತದ ತೀವ್ರತೆಯೂ ಹೆಚ್ಚಾಗುತ್ತಿತ್ತು. ಪ್ರತೀ ಬಾರಿ ಠಾಣೆಗೆ ಹೋದಾಗಲೂ ಹೊಸ ಹೊಸ `ಆರೋಪಿ’ಗಳಿಗೆ ಪೊಲೀಸರು ಥಳಿಸುತ್ತಿದ್ದರೇ ಹೊರತು ಕಳವಾದ ವಸ್ತುಗಳ ಕುರಿತು ಯಾವ ಸುಳಿವೂ ಅವರಿಗೆ ಸಿಕ್ಕಿರಲಿಲ್ಲ. ಈ ಥಳಿಸುವಿಕೆಯನ್ನು ನೋಡಲಾಗದೆ ನಾನು ಕಳವಾದ ವಸ್ತುಗಳ ಆಸೆಯನ್ನೇ ಬಿಟ್ಟೆ’

ಇದು ಭಾರತೀಯ ಪೊಲೀಸ್‌ ವ್ಯವಸ್ಥೆಯ ಒಂದು ಸಣ್ಣ ಸ್ಯಾಂಪಲ್‌. ನಮ್ಮ ಪೊಲೀಸರ ಮಟ್ಟಿಗೆ ತನಿಖೆ ನಡೆಸುವುದೆಂದರೆ ಥಳಿಸುವುದು ಎಂದರ್ಥ.

***

ಕಳೆದ ತಿಂಗಳ (ಫೆಬ್ರವರಿ 2009) 27ರಂದು ಬೆಂಗಳೂರಿನ ಸಾಫ್ಟ್‌ವೇರ್‌ ಇಂಜಿನಿಯರ್‌ ಒಬ್ಬರ ಸುಮಾರು 34,000 ರೂಪಾಯಿ ಬೆಲೆಬಾಳುವ ಮೊಬೈಲ್‌ ಫೋನ್‌ ಒಂದು ಕಳವಾಯಿತು. ಈಗ ಮೊಬೈಲ್‌ ಫೋನ್‌ ಕಳವಾದರೆ ಅದನ್ನು ಪತ್ತೆ ಹಚ್ಚುವುದು ಸುಲಭ. ಕಳೆದು ಹೋದ ಮೊಬೈಲ್‌ ಫೋನ್‌ನ ಐಎಂಇಐ ಸಂಖ್ಯೆ ಅಥವಾ ಇಂಟರ್‌ ನ್ಯಾಷನಲ್‌ ಮೊಬೈಲ್‌ ಎಕ್ವಿಪ್‌ಮೆಂಟ್‌ ಐಡೆಂಟಿಟಿ ನಂಬರ್‌ ಅನ್ನು ಪೊಲೀಸರಿಗೆ ಕೊಟ್ಟರೆ ಸಾಕು. ಕಳೆದು ಹೋದ ಮೊಬೈಲ್‌ ಎಲ್ಲಿ ಬಳಕೆಯಾಗುತ್ತಿದ್ದರೂ ಅದನ್ನು ಪತ್ತೆ ಹಚ್ಚಬಹುದು. ಫೋನ್‌ ಕಳೆದುಕೊಂಡ ಸಾಫ್ಟ್‌ವೇರ್‌ ಇಂಜಿನಿಯರ್‌ ಜೆ.ಪಿ.ನಗರ ಪೊಲೀಸರಿಗೆ ದೂರು ನೀಡುವಾಗ ತಮ್ಮ ಐಎಂಇಐ ಸಂಖ್ಯೆಯನ್ನೂ ತಿಳಿಸಿದ್ದರು.

ಮಾರ್ಚ್‌ ನಾಲ್ಕನೇ ತಾರೀಕಿನಂದು ಎನ್‌.ಆರ್‌.ಕಾಲೋನಿಯ ನಿವಾಸಿ ಮುತ್ತುರಾಜ್‌ ಎಂಬ ಕಾರು ಚಾಲಕ ತ್ಯಾಗರಾಜ ನಗರದ ಬಿಡಿಎ ವಾಣಿಜ್ಯ ಸಂಕೀರ್ಣದಲ್ಲಿದ್ದ ಮೊಬೈಲ್‌ ಅಂಗಡಿಯೊಂದರಿಂದ 1,500 ರೂಪಾಯಿ ಮೌಲ್ಯದ ಮೊಬೈಲ್‌ ಸೆಟ್‌ ಒಂದನ್ನು ಖರೀದಿಸಿದರು. ಇದನ್ನವರು ಬಳಸಲು ತೊಡಗಿದ ಕ್ಷಣದಿಂದ ಅವರ ಸಮಸ್ಯೆಗಳು ಆರಂಭವಾದವು. ಮಾರ್ಚ್‌ 14ರ ಶನಿವಾರ ತ್ಯಾಗರಾಜ ನಗರ ಪೊಲೀಸರು ಮುತ್ತುರಾಜ್‌ರನ್ನು ಠಾಣೆಗೆ ಕರೆಯಿಸಿಕೊಂಡು `ತನಿಖೆ’ ನಡೆಸಿದರು.

ಪೊಲೀಸರದ್ದು ಒಂದೇ ಪ್ರಶ್ನೆ. `ಬೆಲೆಬಾಳುವ ಮೊಬೈಲ್‌ ಸೆಟ್‌ ಎಲ್ಲಿ?’. ಪ್ರಶ್ನೆ ಅರ್ಥವಾಗದೆ ತೊಳಲಾಡಿದ ಮುತ್ತುರಾಜ್‌ ತಮ್ಮಲ್ಲಿರುವ ಸೆಟ್‌ ತೋರಿಸಿದರೆ ಮತ್ತಷ್ಟು ಪೆಟ್ಟುಗಳು ಬಿದ್ದವು. ಮುತ್ತುರಾಜ್‌ ಅವರ ತಾಯಿ ಹೇಳುವಂತೆ `ನನ್ನ ಮಗನ ಕಣ್ಣಿಗೆ ಮೆಣಸಿನ ಪುಡಿ ಹಾಕಿ ಕಾಲಿಗೆ ಹಾಕಿ ಸ್ಟಿಕ್‌ನಲ್ಲಿ ಹೊಡೆದರು’. ಮುತ್ತುರಾಜ್‌ ಖರೀದಿಸಿದ ಮೊಬೈಲ್‌ ಫೋನ್‌ನ ರಸೀದಿ ಮತ್ತು ಬಾಕ್ಸ್‌ಗಳನ್ನು ನೋಡುವ ತನಕವೂ ಪೊಲೀಸರ `ತನಿಖೆ’ ಮುಂದುವರಿಯಿತು. ರಸೀದಿ ಮತ್ತು ಬಾಕ್ಸ್‌ ನೋಡಿದಾಗ ಸಾಫ್ಟ್‌ವೇರ್‌ ಇಂಜಿನಿಯರ್‌ ಕಳೆದುಕೊಂಡ ಮೊಬೈಲ್‌ ಫೋನ್‌ನ ಐಎಂಇಐ ಸಂಖ್ಯೆ ಮತ್ತು ಮುತ್ತುರಾಜ್‌ ಖರೀದಿಸಿದ ಮೊಬೈಲ್‌ ಫೋನ್‌ನ ಐಎಂಇಐ ಸಂಖ್ಯೆಗಳೆರಡೂ ಒಂದೇ ಆಗಿತ್ತು! ತಪ್ಪು ಮಾಡಿದ್ದು ಮೊಬೈಲ್‌ ತಯಾರಿಸಿದ ಕಂಪೆನಿಯವರು. ಆದರೇನಂತೆ ಪೊಲೀಸರ `ತನಿಖೆ’ಯಿಂದ ಮುತ್ತುರಾಜ್‌ರ ಕಾಲಿಗೆ ಗಂಭೀರ ಗಾಯವೇ ಆಗಿತ್ತು.

ಇಷ್ಟೆಲ್ಲಾ ಆದ ಮೇಲೆ ಜೆ.ಪಿ.ನಗರ ಠಾಣೆಯಲ್ಲಿ ಮುತ್ತುರಾಜ್‌ ಅವರ `ತನಿಖೆ’ ನಡೆಸಿದ ಇನ್ಸ್‌ಪೆಕ್ಟರ್‌ ಎಸ್‌.ಕೆ.ಉಮೇಶ್‌ `ನಾವೇನೂ ಮಾಡಲಿಲ್ಲ. ಆತ ತನಿಖೆಯ ಹಾದಿ ತಪ್ಪಿಸಲು ಪ್ರಯತ್ನಿಸಿದ್ದರಿಂದ ಥಳಿಸಿದ್ದು ಮಾತ್ರ ಹೌದು’ ಎಂಬ ಸ್ಪಷ್ಟನೆ ನೀಡಿದರು. ಇಡೀ ಪ್ರಕರಣವನ್ನು ಒಟ್ಟಾಗಿ ಗಮನಿಸಿದರೆ ದಾರಿ ತಪ್ಪಿದ್ದು ಯಾರು ಎಂಬುದಕ್ಕೆ ಹೆಚ್ಚಿನ ವಿವರಣೆಗಳ ಅಗತ್ಯವಿಲ್ಲ.

***

ಭಾರತೀಯ ಪೊಲೀಸರು ಒಂದು ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಶಂಕಿತ ಅಥವಾ ಆರೋಪಿ ಬಡವನಾಗಿದ್ದರೆ ಎಲ್ಲಾ ನಿಯಮಗಳನ್ನು ಮರೆತು ಅವನಿಗೆ ಬಡಿಯುವುದು. ಅಧಿಕಾರ ಮತ್ತು ಪ್ರಭಾವವುಳ್ಳವನಾಗಿದ್ದರೆ ಎಲ್ಲಾ ನಿಯಮಗಳನ್ನೂ ಮರೆತು ಆತನನ್ನು ರಕ್ಷಿಸುವುದು. ಮುತ್ತುರಾಜ್‌ ಪ್ರಕರಣದಲ್ಲಿ ಆದದ್ದು ಇದುವೇ. ಮುತ್ತುರಾಜ್‌ ಕೇವಲ ಕಾರು ಚಾಲಕ. ಹಾಗಾಗಿ ಅವರಿಗೆ ಪೊಲೀಸರು ಥಳಿಸಿದ್ದು ತಪ್ಪೇ ಆಗಿದ್ದರೂ `ನಮ್ಮದು ತಪ್ಪಾಯಿತು’ ಎಂದು ಹೇಳುವ ಸೌಜನ್ಯ ಪೊಲೀಸರಿಗಿಲ್ಲ.

ಈ ಘಟನೆ ನಡೆಯುವುದಕ್ಕೆ ಕೆಲವು ದಿನಗಳ ಮೊದಲು ಬೆಂಗಳೂರಿನ ಹೊರವಲಯದಲ್ಲಿ ರೇವ್‌ ಪಾರ್ಟಿಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದರು. ಖಾಸಗಿ ಸ್ಥಳವೊಂದರಲ್ಲಿ ನಡೆಯುತ್ತಿದ್ದ ಪಾರ್ಟಿಯೊಂದರ ಮೇಲೆ ಪೊಲೀಸರೇಕೆ ದಾಳಿ ನಡೆಸಿದರು ಎಂಬ ಪ್ರಶ್ನೆಯಿಂದ ಆರಂಭಿಸಿ ಅಲ್ಲಿ ಯಾವುದೇ ಮಾದಕ ದ್ರವ್ಯ ದೊರೆಯಲಿಲ್ಲ ಎಂಬ ತನಕದ ಎಲ್ಲಾ ವಿಚಾರಗಳೂ ಮಾಧ್ಯಮಗಳಲ್ಲಿ ಚರ್ಚೆಯಾದವು. ಪೊಲೀಸರ `ಅತ್ಯುತ್ಸಾಹ’ಕ್ಕೆ ಕಾರಣವೇನು ಎಂಬುದರ ಕುರಿತು ಒಂದು ತನಿಖೆಗೂ ಪೊಲೀಸ್‌ ಮಹಾನಿರ್ದೇಶಕರು ಆದೇಶಿಸಿದ್ದಾರೆ. ಈ ಪ್ರಕರಣದಲ್ಲಿ ಬಂಧಿತರಿಗೆ ಜಾಮೀನು ಪಡೆಯಲು ಆದ ತೊಂದರೆ ಮುಂತಾದುವುಗಳೆಲ್ಲವೂ ಚರ್ಚೆಗೊಳಪಟ್ಟಿತು.

ಆದರೆ ಮುತ್ತುರಾಜ್‌ ಪ್ರಕರಣದಲ್ಲಿ ತಪ್ಪು ಮಾಡಿದ ಪೊಲೀಸರು ತೋರಿಕೆಗೂ ತಮ್ಮ ತಪ್ಪು ಒಪ್ಪಿಕೊಳ್ಳಲಿಲ್ಲ. ಮಾಧ್ಯಮ ವರದಿಗಳನ್ನು ನೋಡಿ ಸ್ವಯಂ ಪ್ರೇರಣೆಯಿಂದ ಮಾನವ ಹಕ್ಕು ಉಲ್ಲಂಘನೆಯ ಪ್ರಕರಣ ದಾಖಲಿಸುವ ರಾಜ್ಯ ಮಾನವ ಹಕ್ಕುಗಳ ಆಯೋಗ ಈ ಲೇಖನ ಸಿದ್ಧಪಡಿಸುವವ ತನಕವೂ ಮೌನವಾಗಿಯೇ ಇತ್ತು.

***

ತನಿಖೆಗೂ ಥಳಿಸುವಿಕೆಗೂ ವ್ಯತ್ಯಾಸವಿಲ್ಲದಂತೆ ಪೊಲೀಸರು ವರ್ತಿಸುವುದೇಕೆ ಎಂಬ ಪ್ರಶ್ನೆ ಯಾವತ್ತೂ ಚರ್ಚೆಯಾಗಿಯೇ ಇಲ್ಲ. ಯಾರದ್ದಾದರೂ ಮನೆಯಲ್ಲಿ ಕಳವಾಯಿತು ಎಂದಾಕ್ಷಣ ಮೊದಲಿಗೆ ಮನೆಗೆಲಸದವರನ್ನು ಕರದೊಯ್ದು ಥಳಿಸುವುದನ್ನೇ ಪೊಲೀಸರು ತನಿಖೆ ಎಂದುಕೊಂಡಿದ್ದಾರೆ. ಮುತ್ತುರಾಜ್‌ಗೆ ಥಳಿಸಿದ್ದನ್ನು `ಆತ ಪೊಲೀಸರನ್ನು ತಪ್ಪುದಾರಿಗೆಳೆದದ್ದರಿಂದ ಥಳಿಸಬೇಕಾಯಿತು’ ಎಂದು ಸಮರ್ಥಿಸಿಕೊಳ್ಳುವ ಪೊಲೀಸರು ಶಾಸಕ ಸಂಪಂಗಿ ಲಂಚ ಪಡೆದು ತಲೆನೋವು, ಎದೆನೋವು ಎಂದು ನಟಿಸಿದಾಗ ಆಸ್ಪತ್ರೆಗೆ ದಾಖಲಿಸುವ ಬದಲಿಗೆ ಅವರಿಗೂ ಥಳಿಸಿ ನೀಡಿ ಸತ್ಯ ತಿಳಿದುಕೊಳ್ಳಲೇಕೆ ಪ್ರಯತ್ನಿಸಲಿಲ್ಲ? ಪೊಲೀಸರಿಗೆ ತರಬೇತಿ ನೀಡುವಾಗಲೇ ತನಿಖೆ ಎಂದರೆ ಥಳಿಸುವುದು ಎಂದು ಹೇಳಿಕೊಡಲಾಗುತ್ತದೆಯೇ? ಅಷ್ಟೇಕೆ ಪೊಲೀಸರಿಗೆ ಹೇಗೆ ತರಬೇತಿ ನೀಡಲಾಗುತ್ತಿದೆ? ಈ ತರಬೇತಿಯ ಪಠ್ಯ ಕ್ರಮವೇನು? ಈ ಕುರಿತಂತೆ ಜನ ಸಾಮಾನ್ಯರಿಗೆ ತಿಳಿಸುವ ಏನಾದರೂ ವ್ಯವಸ್ಥೆ ಇದೆಯೇ?

ಹೀಗೆ ಪ್ರಶ್ನೆಗಳು ಬೆಳೆಯುತ್ತಲೇ ಹೋಗುತ್ತವೆ. ಈ ಪ್ರಶ್ನೆಗಳಿಗೆ ಎಲ್ಲಿಂದಲೂ ಉತ್ತರ ಸಿಗುವುದಿಲ್ಲ. ಏಕೆಂದರೆ ಪೊಲೀಸರು ಅಧಿಕಾರ ಮತ್ತು ಪ್ರಭಾವವುಳ್ಳವರ ನಾಯಿಗೂ ಗೌರವ ನೀಡುತ್ತಾರೆ. ಹಾಗಾಗಿ ಈ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಳ್ಳುವ ಧೈರ್ಯ ಮತ್ತು ಸಾಮರ್ಥ್ಯವುಳ್ಳವರು ಯಾವತ್ತೂ ಪೊಲೀಸರ ಉದ್ಧಟತನವನ್ನು ಎದುರಿಸಿರುವುದೇ ಇಲ್ಲ. ಅದರಿಂದಾಗಿಯೇ ಅಧಿಕಾರರೂಢ ರಾಜಕಾರಣಿಗಳು ಪೊಲೀಸರನ್ನು ಮನುಷ್ಯರನ್ನಾಗಿಸುವ ಬಗ್ಗೆ ಮಾತನಾಡುವುದೂ ಇಲ್ಲ. ಸ್ಥಿತಿ ಹೀಗಿರುವಾಗ ಪೊಲೀಸ್‌ ವ್ಯವಸ್ಥೆಯನ್ನು ಮಾನವೀಯಗೊಳಿಸುವುದು ಹೇಗೆ?

ಈ ಪ್ರಶ್ನೆಗೆ ಇರುವ ಉತ್ತರ ಒಂದೇ. ಪೊಲೀಸ್‌ ವ್ಯವಸ್ಥೆಯೊಳಗೇ ಇರುವ ಯಾರಾದರೂ ಇಂಥದ್ದೊಂದು ಕ್ರಿಯೆಯನ್ನು ಆರಂಭಿಸಬೇಕು. ಕರ್ನಾಟಕದಲ್ಲೀಗ ಇದಕ್ಕೆ ಕಾಲ ಪಕ್ವವಾಗಿದೆ. ಪೊಲೀಸ್‌ ಸುಧಾರಣೆಯ ಅಗತ್ಯದ ಬಗ್ಗೆ ಸಾಕಷ್ಟು ತಿಳಿದುಕೊಂಡಿರುವ ಮತ್ತು ಅದರಲ್ಲಿ ಆಸಕ್ತಿ ಇರುವ ಡಾ.ಅಜ್‌ಕುಮಾರ್‌ ಸಿಂಗ್‌ ಪೊಲೀಸ್‌ ಮಹಾನಿರ್ದೇಶಕರಾಗಿದ್ದಾರೆ. ಸಿಓಡಿಯ ಮಹಾನಿರ್ದೇಶಕ ಡಾ.ಡಿ.ವಿ.ಗುರುಪ್ರಸಾದ್‌ ಕೂಡಾ ಈ ವಿಷಯಗಳಲ್ಲಿ ಆಸಕ್ತಿ ಮತ್ತು ಕಾಳಜಿಗಳುಳ್ಳವರು. ಈ ಸುಶಿಕ್ಷಿತ ಮತ್ತು ಸಂಭಾವಿತರ ಕಾಲದಲ್ಲಿ ಸುಧಾರಣೆಯ ಪ್ರಕ್ರಿಯೆ ಆರಂಭವಾಗದಿದ್ದರೆ ಅದು ಸದ್ಯೋಭವಿಷ್ಯದಲ್ಲಿ ಅದನ್ನು ನಿರೀಕ್ಷಿಸುವುದೇ ತಪ್ಪಾಗಬಹುದು

Posted in ಒಂಟಿದನಿ (ಉದಯವಾಣಿ ಅಂಕಣ), ಲೇಖನಗಳು | Leave a comment

ಹರ ಕೊಲ್ಲಲ್‌ ಪರ ಕಾಯ್ವನೆ?

ಕಳೆದ ಎರಡು ವರ್ಷಗಳಲ್ಲಿ ಬಿಹಾರದಿಂದ ಆರಂಭಿಸಿ ಕರ್ನಾಟಕದ ಹಾಸನದ ತನಕ ದಿಡೀರ್‌ ನ್ಯಾಯದಾನದ ಹಲವು ಪ್ರಕರಣಗಳನ್ನು ನಾವು ಮಾಧ್ಯಮಗಳಲ್ಲಿ ಓದಿ ತಿಳಿದಿದ್ದೇವೆ. ಎರಡು ವರ್ಷಗಳ ಹಿಂದೆ ಬಿಹಾರದ ವೈಶಾಲಿ ಜಿಲ್ಲೆಯ ಧೆಲ್‌ಫೋರ್ವಾ ಗ್ರಾಮದಲ್ಲಿ ಕಳವು ಆರೋಪಿಯೊಬ್ಬನನ್ನು ಬೀದಿಯಲ್ಲೇ ಭೀಕರವಾಗಿ ಥಳಿಸಿದ್ದು ಟಿ.ವಿ.ಚಾನೆಲ್‌ಗಳಲ್ಲಿ ಹಲವಾರು ಬಾರಿ ಪ್ರಸಾರವಾಗಿತ್ತು.

ಇದಾದ ಒಂದೇ ತಿಂಗಳಲ್ಲಿ ಕೇರಳದ ಮಲಪ್ಪುರಂ ಜಿಲ್ಲೆಯ ಎಡಪ್ಪಾಲ್‌ನಲ್ಲಿ ಚಿನ್ನದ ಕಡಗವೊಂದನ್ನು ಕದ್ದಿದ್ದಾರೆಂಬ ಸಂಶಯದ ಮೇಲೆ 40 ವರ್ಷದ ಗರ್ಭಿಣಿ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳನ್ನು ಅಮಾನವೀಯವಾಗಿ ಥಳಿಸಲಾಗಿತ್ತು. ಜನಸಂದಣಿ ಇರುವ ಮಾರುಕಟ್ಟೆ ಪ್ರದೇಶದಲ್ಲಿ ಈ ಘಟನೆ ನಡೆದಿತ್ತು. ಈ ಘಟನೆಯನ್ನು ಟಿ.ವಿ.ಚಾನೆಲ್‌ ವರದಿಗಾರನೊಬ್ಬ ಚಿತ್ರೀಕರಿಸಿದ್ದರಿಂದ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿತ್ತು.

ಈ ಎರಡೂ ಪ್ರಕರಣಗಳಲ್ಲಿ ಪೊಲೀಸರು ಮೂಕ ಸಾಕ್ಷಿಗಳಾಗಿದ್ದರು. ಬಿಹಾರದ ಘಟನೆಯ ಸಂದರ್ಭದಲ್ಲಂತೂ ಸಾರ್ವಜನಿಕರ ಥಳಿಸುವಿಕೆಯ ನಂತರ ಪೊಲೀಸರು ಆರೋಪಿಯನ್ನು ರಸ್ತೆಯಲ್ಲಿ ಎಳೆದಾಡಿದ್ದರು. ಕೇರಳದ ಘಟನೆಯಲ್ಲಿ ನಿರಪರಾಧಿ ಮಹಿಳೆ ಮತ್ತು ಆಕೆಯ ಇಬ್ಬರ ಮಕ್ಕಳಿಗೆ ವೈದ್ಯಕೀಯ ನೆರವು ನೀಡುವುದರ ಬದಲಿಗೆ ಅವರನ್ನು ಪೊಲೀಸ್‌ ಠಾಣೆಗೆ ಕರೆದೊಯ್ಯಲಾಗಿತ್ತು.
ಈ ಬಗೆಯ ದಿಡೀರ್‌ ನ್ಯಾಯದಾನದ ಪ್ರಕರಣಗಳು ಬಿಹಾರದಲ್ಲಿ ಸ್ವಲ್ಪ ಹೆಚ್ಚು. ಹಾಗೆಂದು ದೇಶದ ಉಳಿದೆಡೆ ಇಲ್ಲ ಎಂದಲ್ಲ. ಬಸ್‌ನಿಲ್ದಾಣದಲ್ಲಿ, ಮಾರುಕಟ್ಟೆ ಪ್ರದೇಶದಲ್ಲಿ ಒಬ್ಬನ ಮೇಲೆ ಕಳ್ಳನೆಂಬ ಸಂಶಯ ಬಂದರೆ ಆತ ಜನರಿಗೆ ಕಳ್ಳರ ಮೇಲಿರುವ ಸಿಟ್ಟಿನ ಪರಿಣಾಮವನ್ನು ಅನುಭವಿಸಬೇಕಾಗುತ್ತದೆ. ಹೀಗೆ ಥಳಿತಕ್ಕೆ ಗುರಿಯಾದವರಲ್ಲಿ ಕೆಲವರು ಸ್ಥಳದಲ್ಲಿ ಮೃತಪಟ್ಟರೆ ಇನ್ನು ಕೆಲವರು ಹಲವಾರು ದಿನ ಆಸ್ಪತ್ರೆಯಲ್ಲಿದ್ದು ಕೊನೆಯುಸಿರೆಳೆದದ್ದೂ ಇದೆ.

ಈ ಬಗೆಯ ದಿಡೀರ್‌ ನ್ಯಾಯಕ್ಕೆ ಜನರೇಕೆ ಮುಂದಾಗುತ್ತಾರೆ ಎಂಬ ಪ್ರಶ್ನೆಗೆ ಇರುವ ಸುಲಭದ ಮತ್ತು ಸರಳವಾದ ಉತ್ತರ ಒಂದೇ. `ತಡವಾಗಿ ದೊರೆಯುವ ನ್ಯಾಯ ಅನ್ಯಾಯ’. ಪ್ರಕರಣವೊಂದು ನ್ಯಾಯಾಲಯದಲ್ಲಿದೆ ಎಂದರೆ ಇನ್ನು ಹಲವು ವರ್ಷಗಳ ಕಾಲ ಅದರ ಬಗ್ಗೆ ಚಿಂತಿಸದೇ ಇರುವುದೆಂಬ ಮನೋಭಾವ ಎಲ್ಲರಲ್ಲೂ ಮನೆ ಮಾಡಿದೆ. ಪರಿಣಾಮವಾಗಿ ಅಪರಾಧಿಕ ಪ್ರಕರಣಗಳಲ್ಲಿ ದಿಡೀರ್‌ ನ್ಯಾಯ ಒದಗಿಸುವ ಕೆಲಸಗಳಿಗೆ ಒಂದು ಬಗೆಯ ಹಿಂಬಾಗಿಲ ಪ್ರೋತ್ಸಾಹವೂ ಇದೆ. ಹೈದರಾಬಾದ್‌ನಲ್ಲಿ ಯುವತಿಯರ ಮೇಲೆ ಆಸಿಡ್‌ ಎರಚಿದವರು `ಎನ್‌ಕೌಂಟರ್‌’ನಲ್ಲಿ ಬಲಿಯಾದಾಗ ಜನರು ಪೊಲೀಸರಿಗೆ ಹೂಗುಚ್ಛಗಳನ್ನು ನೀಡಿ ಶ್ಲಾಘಿಸಿದ್ದನ್ನಿಲ್ಲಿ ನೆನಪಿಸಿಕೊಳ್ಳಬಹುದು.

***

ಕಳೆದ ಎರಡು ವರ್ಷಗಳಲ್ಲಿ ಕರ್ನಾಟಕ ಸರ್ಕಾರ ಹಲವಾರು ಕ್ರಿಮಿನಲ್‌ ಮೊಕದ್ದಮೆಗಳನ್ನು ಹಿಂದಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಿತು. ಇದರಲ್ಲಿ ಪ್ರಚೋದನಕಾರಿ ಭಾಷಣ, ಸರ್ಕಾರಿ ಕಚೇರಿಗಳ ಮೇಲಿನ ದಾಳಿ, ಹಲ್ಲೆ, ಕೊಲೆಯತ್ನದಂಥ ಪ್ರಕರಣಗಳೂ ಇದ್ದವು. ಈ ಪ್ರಕರಣಗಳಲ್ಲಿ ಪಾಲ್ಗೊಂಡವರಲ್ಲಿ ಶಾಸಕರಿದ್ದರು. ಕೆಲವು ಸಂಘಟನೆಗಳ ನಾಯಕರಿದ್ದರು. ಈ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ಕ್ರಿಯೆಯಲ್ಲಿ ರಾಜಕೀಯವಿದೆ ಎಂದು ಭಾವಿಸಬಹುದು. ಆದರೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರು ಮೊಕದ್ದಮೆ ಹೂಡುವುದನ್ನೇ ತಡೆಯುವ, ಹೂಡಿದ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳುವ ಕ್ರಮಗಳನ್ನು ಸರ್ಕಾರ ಹೇಗೆ ಸಮರ್ಥಿಸಿಕೊಳ್ಳುತ್ತದೆ.

ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ನಂತರ ಇಬ್ಬರು ಭ್ರಷ್ಟ ಐಎಎಸ್‌ ಅಧಿಕಾರಿಗಳನ್ನು ರಕ್ಷಿಸಲಾಯಿತು. ಇವರಲ್ಲೊಬ್ಬರು ಆದಾಯಕ್ಕೆ ಮೀರಿದ ಆಸ್ತಿ ಪಾಸ್ತಿ ಸಂಗ್ರಹಿಸಿದ್ದ ಕಾರಣಕ್ಕೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿ. ಮತ್ತೊಬ್ಬರು ಮಹಿಳಾ ಐಎಎಸ್‌ ಅಧಿಕಾರಿ. ಈಕೆ ಜಿಲ್ಲಾ ಪಂಚಾಯಿತಿಯೊಂದರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದಾಗ ಸರ್ಕಾರದ ಹಣವನ್ನು ಸ್ವಂತ ಖಾತೆಗೆ ಹಾಕಿ ದುರುಪಯೋಗ ಪಡಿಸಿಕೊಂಡಿದ್ದ ಆರೋಪ ಹೊತ್ತವರು. ಈಕೆಯ ವಿರುದ್ಧ ಇಲಾಖೆ ತನಿಖೆ ಮುಗಿದಿತ್ತು. ಸಿಬಿಐ ತನಿಖೆ ನಡೆಯುತ್ತಿತ್ತು. ರಾಜ್ಯದ ಮುಖ್ಯ ಕಾರ್ಯದರ್ಶಿಯೊಬ್ಬರು ಈಕೆಯ ಮೇಲೆ ಕ್ರಮ ಕೈಗೊಳ್ಳುವುದು ಅಗತ್ಯವೆಂದು ಸ್ಪಷ್ಟವಾಗಿ ಶಿಫಾರಸು ಮಾಡಿದ್ದರು. ಇಷ್ಟಾಗಿಯೂ ಮೊಕದ್ದಮೆಯನ್ನು ಮುಕ್ತಾಯಗೊಳಿಸಲು ಮುಖ್ಯಮಂತ್ರಿ ಕಾರ್ಯಾಲಯವೇ ನಿರ್ಧರಿಸತೆಂದು ಮಾಧ್ಯಮ ವರದಿಗಳು ಹೇಳುತ್ತವೆ. ಇವಷ್ಟೇ ಅಲ್ಲದೆ ನಕಲು ಮಾಡುವುದಕ್ಕೇ ಖ್ಯಾತರಾದ ಪ್ರೊಫೆಸರ್‌ ಒಬ್ಬರು ಆರೋಪ ಮುಕ್ತರಾದ ಕಥೆ ಬೇರೆಯೇ ಇದೆ.

ಇತ್ತೀಚೆಗೆ ಭಾರೀ ಸುದ್ದಿ ಮಾಡಿದ ಶಾಸಕ ವೈ.ಸಂಪಂಗಿ ಲಂಚ ಪ್ರಕರಣದ ವಿಷಯದಲ್ಲೂ ಇದೇ ಸಂಭವಿಸುತ್ತಿದೆ. ಶಾಸಕರ ಭವನಕ್ಕೆ ಇದ್ದಕ್ಕಿದ್ದಂತೆಯೇ ಸದನದ ಸ್ಥಾನವನ್ನು ನೀಡಲಾಯಿತು. ಅಂದರೆ ಶಾಸಕರ ಭವನದಲ್ಲಿ ಯಾರನ್ನಾದರೂ ಬಂಧಿಸಬೇಕಿದ್ದರೆ ಅದಕ್ಕೆ ವಿಧಾನಸಭಾಧ್ಯಕ್ಷರ ಅನುಮತಿ ಪಡೆಯಬೇಕಾಗುತ್ತದೆ. ಸಂಪಂಗಿ ಪ್ರಕರಣದ ಹಿನ್ನೆಲೆಯಲ್ಲೇ ಇದನ್ನು ನೋಡುವುದಾದರೆ ಇನ್ನು ಮುಂದೆ ಶಾಸಕರ ಭವನದಲ್ಲಿ ಶಾಸಕರು ತಕ್ಷಣ ಬಂಧನಕ್ಕೊಳಗಾಗುವ ಭೀತಿಯಿಲ್ಲದೆ ಲಂಚ ಪಡೆಯುವುದೂ ಸೇರಿದಂತೆ ಏನು ಬೇಕಾದರೂ ಮಾಡಬಹುದು.

***

ಇದನ್ನೆಲ್ಲಾ ಗಮನಿಸಿಯೇ ಪ್ರಕಾಶ್‌ಸಿಂಗ್ಖ್‌/ ಭಾರತ ಸರ್ಕಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಬಹಳ ಮುಖ್ಯವಾದ ತೀರ್ಪನ್ನು ನೀಡಿತ್ತು. ಪೊಲೀಸರು ಆಯಾ ರಾಜ್ಯ ಸರ್ಕಾರದ ಪ್ರತಿನಿಧಿಯಾಗಿರುವುದರ ಬದಲಿಗೆ ಕಾನೂನಿನ ಪ್ರತಿನಿಧಿಯಾಗಿರುವಂತೆ ವ್ಯವಸ್ಥೆಯನ್ನು ಬದಲಾಯಿಸಬೇಕು. ಇದಕ್ಕಾಗಿ ಪೊಲೀಸರ ವರ್ಗಾವಣೆ ಮತ್ತಿತರ ಕ್ರಿಯೆಗಳಲ್ಲಿ ಸರ್ಕಾರ ಹಸ್ತಕ್ಷೇಪ ನಡೆಸದಂತೆ ನೋಡಿಕೊಳ್ಳಲು ಒಂದು ಸಕ್ಷಮ ಪ್ರಾಧಿಕಾರವನ್ನು ಸ್ಥಾಪಿಸಬೇಕು ಮುಂತಾದ ಪೊಲೀಸ್‌ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಬೇಕೆಂದು ನ್ಯಾಯಾಲಯ ಹೇಳಿತ್ತು.

ಪೊಲೀಸ್‌ ವ್ಯವಸ್ಥೆಯೆಂಬುದು ಸರ್ಕಾರದ ಪ್ರತಿನಿಧಿಯಾಗದೆ ಕಾನೂನಿನ ಪ್ರತಿನಿಧಿಯಾಗುವ ಕ್ರಿಯೆ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ತಂದುಕೊಡುತ್ತದೆ. 2006ರ ಸೆಪ್ಟೆಂಬರ್‌ 22ರಂದು ತೀರ್ಪು ನೀಡಿದಾಗ ವ್ಯವಸ್ಥೆಯನ್ನು ಬದಲಾಯಿಸುವುದಕ್ಕೆ ಸರ್ಕಾರಗಳಿಗೆ 2007ರ ಡಿಸೆಂಬರ್‌ 31ರ ತನಕ ಕಾಲಾವಕಾಶ ನೀಡಲಾಗಿತ್ತು. ಬದಲಾವಣೆಗಳನ್ನು ಮಾಡುತ್ತೇವೆಂದು ಒಪ್ಪಿದ್ದ ಕೆಲವು ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ನ್ಯಾಯಾಲಯ ಕೊಟ್ಟ ಡೆಡ್‌ಲೈನ್‌ ಮುಗಿದು ಒಂದು ವರ್ಷ ದಾಟಿದೆ. ಪೊಲೀಸ್‌ ಆಯೋಗದ ಶಿಫಾರಸುಗಳ ಜಾರಿಗೆ ಕ್ರಿಯಾ ಯೋಜನೆ ರೂಪಿಸಿದ್ದ ಅಧಿಕಾರಿ ಶ್ರೀಕುಮಾರ್‌ ಈಗ ನಿವೃತ್ತರಾಗಿದ್ದಾರೆ.

***

ಪೊಲೀಸರನ್ನು ಕಾನೂನಿನ ಪ್ರತಿನಿಧಿಗಳನ್ನಾಗಿಸುತ್ತೇವೆಂದು ನ್ಯಾಯಾಲಯಕ್ಕೆ ಭರವಸೆ ನೀಡಿದ್ದ ಸರ್ಕಾರ ಪೊಲೀಸರನ್ನು ತನ್ನ ಕೈಗೊಂಬೆಯಾಗಿಯೇ ಉಳಿಸಿಕೊಂಡಿದೆ. ತನಗೆ ಬೇಡವಾದವರ ಮೇಲೆ ಮೊಕದ್ದಮೆ ಹೂಡುವುದಕ್ಕೂ ತನಗೆ ಬೇಕಿದ್ದವರ ಮೇಲಿರುವ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳುವ ಕೆಲಸವನ್ನೂ ಅದು ಮಾಡುತ್ತಿದೆ. ಇದು ಹಣ ಮತ್ತು ಅಧಿಕಾರ ಬಲವಿರುವವರಿಗೆ ಯಾವ ಕಾನೂನು ಅನ್ವಯಿಸುವುದಿಲ್ಲ ಎಂಬ ಸಂದೇಶವನ್ನು ಜನರಿಗೆ ರವಾನಿಸುತ್ತದೆ. ಇದರ ಪರಿಣಾಮ ಕಳ್ಳರಿಗೆ ಬೀದಿಯಲ್ಲೇ ಬಡಿದು ಪಾಠ ಕಲಿಸುವ ದಿಡೀರ್‌ ನ್ಯಾಯದಾನದ ವ್ಯಾಪ್ತಿಯನ್ನು ಜನರು ವಿಧಾನ ಸೌಧಕ್ಕೂ ಶಾಸಕರ ಭವನಕ್ಕೂ ಸರ್ಕಾರೀ ಕಚೇರಿಗಳಿಗೂ ವಿಸ್ತರಿಸಿಕೊಳ್ಳುವಲ್ಲಿ ಕಾಣಿಸಿಕೊಳ್ಳಬಹುದು. ಆ ಹೊತ್ತಿಗೆ ಸರಿಪಡಿಸುವುದಕ್ಕೇನೂ ಉಳಿದಿರುವುದಿಲ್ಲ!

Posted in ಒಂಟಿದನಿ (ಉದಯವಾಣಿ ಅಂಕಣ), ಲೇಖನಗಳು | Leave a comment

ಹದಿನಾಲ್ಕನೇ ಲೂಯಿಯೂ ರಾಮಚಂದ್ರೇಗೌಡರೂ

ಫೆಬ್ರವರಿ 18ರಂದು ಬೆಂಗಳೂರಿನ ಮಾಣಿಕ್ಯವೇಲು ಮ್ಯಾನ್ಷನ್‌ನಲ್ಲಿ ನಡೆದ ರಾಷ್ಟ್ರೀಯ ಆಧುನಿಕ ಕಲಾ ಗ್ಯಾಲರಿಯ ಉದ್ಘಾಟನಾ ಸಮಾರಂಭದಲ್ಲಿ ಸಚಿವರೊಬ್ಬರು ನೀಡಿದ ಆದೇಶ ಹೀಗಿತ್ತು. `ಗವರ್ನ್‌ಮೆಂಟ್‌ ಈಸ್‌ ಸ್ಪೀಕಿಂಗ್‌ ಹಿಯರ್‌. ಪುಲ್‌ ದೆಮ್‌ ಔಟ್‌ ಐ ಸೇ’. (ಇಲ್ಲಿ ಸರ್ಕಾರ ಮಾತನಾಡುತ್ತಿದೆ. ನಾನು ಹೇಳುತ್ತಿದ್ದೇನೆ ಅವರನ್ನು ಹೊರಗೆ ಹಾಕಿ). ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು `ನನ್ನ ಸರ್ಕಾರ’ ಎಂದು ಮಾತನಾಡುವುದನ್ನು ನಾವು ಕೇಳಿದ್ದೇವೆ. ರಾಷ್ಟ್ರಪತಿಗಳು ಮತ್ತು ರಾಜ್ಯಪಾಲರು ಓದುವ ಆಡಳಿತಾರೂಢ ರಾಜಕೀಯ ಪಕ್ಷಗಳು ಸಿದ್ಧಪಡಿಸಿದ ಭಾಷಣದಲ್ಲಿ `ನನ್ನ ಸರ್ಕಾರ’ ಎಂಬ ಪ್ರಯೋಗವಿರುತ್ತದೆ. ಆದರೆ ಮಂತ್ರಿಗಳು, ಶಾಸಕರು, ಸಂಸದರು ಈ ಬಗೆಯ ಪ್ರಯೋಗ ಮಾಡಿದ್ದು ಸ್ವಾತಂತ್ರ್ಯೋತ್ತರ ಭಾರತದ ಇತಿಹಾಸದಲ್ಲೆಲ್ಲೂ ದಾಖಲಾಗಿಲ್ಲ.

ರಾಜ್ಯಪಾಲ, ರಾಷ್ಟ್ರಪತಿಗಳಂಥವರು `ನನ್ನ ಸರ್ಕಾರ’ ಎಂಬ ಪ್ರಯೋಗವನ್ನು ಬಳಸುತ್ತಾರೆಯೇ ಹೊರತು ಇವರ್ಯಾರೂ `ನಾನೇ ಸರ್ಕಾರ’ ಎಂದು ಹೇಳಿದ್ದಂತೂ ಇಲ್ಲವೇ ಇಲ್ಲ. ಹೀಗೆ `ನಾನೇ ಸರ್ಕಾರ’ ಎಂದು ಹೇಳಿದವನಿದ್ದರೆ ಅವನು 17ನೇ ಶತಮಾನದ ಫ್ರೆಂಚ್‌ ದೊರೆ ಹದಿನಾಲ್ಕನೇ ಲೂಯಿ. ಅವನು ಸಂಸತ್‌ ಸ್ವಯಂಪ್ರೇರಣೆಯಿಂದ ಸಭೆ ಸೇರುವುದರಿಂದ ವಿಚಲಿತನಾಗಿ `l’etat C’est moi’(ನಾನೇ ಪ್ರಭುತ್ವ ಅಥವಾ ನಾನೇ ಸರ್ಕಾರ) ಎಂದು ಕಿರುಚಿದ್ದನಂತೆ.

`ಸರ್ಕಾರ ಮಾತನಾಡುತ್ತಿದೆ’ ಎಂದು ಹೇಳಿದ ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರೇಗೌಡರು ಖಂಡಿತವಾಗಿಯೂ ಹದಿನಾಲ್ಕನೇ ಲೂಯಿಯಂಥ ಚಕ್ರವರ್ತಿಯಂತೂ ಅಲ್ಲ. ಅವರು ಜನರಿಂದ ಅದೂ ಪದವೀಧರರಿಂದ ಆಯ್ಕೆಯಾಗಿರುವ ಶಾಸಕ. ಸರಳವಾಗಿ ಹೇಳುವುದಾದರೆ ಜನಪ್ರತಿನಿಧಿ ಮತ್ತು ಮುಖ್ಯಮಂತ್ರಿಗಳಿಂದ ನೇಮಕಗೊಂಡ ಸಚಿವ. ಹಾಗಾಗಿ ಅವರೇ ಸರ್ಕಾರವಾಗಿರುವ ಯಾವ ಸಾಧ್ಯತೆಯೂ ಇಲ್ಲ.

ಆಧುನಿಕ ಕಲಾ ಗ್ಯಾಲರಿ ಕೇಂದ್ರ ಸರ್ಕಾರದ ಆಡಳಿತದ ಪರಿಧಿಯಲ್ಲಿರುವಂಥದ್ದು. ಇದರ ಉದ್ಘಾಟನೆಯಲ್ಲಿ ಸಚಿವ ರಾಮಚಂದ್ರೇಗೌಡರು ಮುಖ್ಯಮಂತ್ರಿಗಳ ಪ್ರತಿನಿಧಿಯಾಗಿದ್ದರು. ಈ ಅಂಶವನ್ನು ಒಪ್ಪಿಕೊಂಡರೂ ರಾಮಚಂದ್ರೇಗೌಡರು ಸರ್ಕಾರವಾಗಲು ಸಾಧ್ಯವಿಲ್ಲ. ಭಾರತದ ಪ್ರತಿನಿಧಿಯಾಗಿ ಹೊರ ದೇಶಗಳಲ್ಲಿರುವ ರಾಯಭಾರಿಗಳು ಭಾರತ ಸರ್ಕಾರದ ಪ್ರತಿನಿಧಿಗಳೇ ಹೊರತು ಅವರೇ ಭಾರತ ಸರ್ಕಾರವಲ್ಲ ಎಂಬ ತರ್ಕವನ್ನು ಇಲ್ಲಿಗೂ ಅನ್ವಯಿಸಬಹುದು.

***

ಒಟ್ಟಿನಲ್ಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಯಾವ ವ್ಯಕ್ತಿಯೂ `ನಾನೇ ಸರ್ಕಾರ’ ಎಂದು ಹೇಳುವ ಯಾವ ಅವಕಾಶವೂ ಇಲ್ಲ ಎಂಬ ತೀರ್ಮಾನಕ್ಕೆ ಬರಬಹುದು. ಅಂದರೆ ಮಂತ್ರಿಯೊಬ್ಬರು `ನಾನೇ ಸರ್ಕಾರ’ ಎಂದಿದ್ದರೆ ಅದು ಅಪ್ರಜಾಸತ್ತಾತ್ಮಕ ಹೇಳಿಕೆ ಎಂಬುದು ಸಂಶಯಾತೀತವಾಗಿ ಸ್ಪಷ್ಟ. ಆದರೆ ರಾಮಚಂದ್ರೇಗೌಡರ ಪ್ರಕರಣದಲ್ಲಿ ಸಂಭವಿಸಿದ್ದು ಬೇರೆಯೇ.

`ಸರ್ಕಾರ ಮಾತನಾಡುತ್ತಿದೆ. ಅವರನ್ನು ಹೊರಗೆ ಹಾಕಿ’ ಎಂಬ ಹೇಳಿಕೆಯ ಕೊನೆಯ ಭಾಗ ಮತ್ತು ಅದರ ಪರಿಣಾಮ ಮಾತ್ರ ಎಲ್ಲರಿಗೂ ಮುಖ್ಯವಾಗಿಬಿಟ್ಟಿದೆ. ರಾಮಚಂದ್ರೇಗೌಡರು ನೀಡಿದ ಆದೇಶ ಪೊಲೀಸರಿಗಲ್ಲದೇ ಇದ್ದರೂ ಪೊಲೀಸರು ಭಾಷಣಕ್ಕೆ ಅಡ್ಡಿಪಡಿಸುತ್ತಿದ್ದ ಕಲಾವಿದನನ್ನು ಸಮ್ಮೇಳನ ಸಭಾಂಗಣದಿಂದ ಹೊರಗೆ ಹಾಕಿದರು. ಹೀಗೆ ಹೊರಗೆ ಹಾಕಿದ್ದನ್ನು ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಯ ಕುರಿತಂತೆ ಕಾಳಜಿಯುಳ್ಳವರು ಒಟ್ಟು ಸೇರಿ ಪ್ರತಿಭಟಿಸಿದರು. ಆದರೆ ಮಂತ್ರಿಯೊಬ್ಬ `ನಾನೇ ಸರ್ಕಾರ’ ಎಂಬ ದಾರ್ಷ್ಟ್ಯ ತೋರಿದ್ದು ಎಲ್ಲಿಯೂ ಯಾರನ್ನೂ ಕಾಡಲಿಲ್ಲ.


ಹೀಗೆ ಮಂತ್ರಿಗಳು ಮತ್ತು ಅಧಿಕಾರಿಗಳು ಅವರೇ ಸರ್ಕಾರವಾಗುವುದು ಇದೇ ಮೊದಲೇನೂ ಅಲ್ಲ. ಎಚ್‌.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಮೈಸೂರಿನಲ್ಲಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದಾಗಲೂ ಇಂಥದ್ದೇ ಒಂದು ಘಟನೆ ಸಂಭವಿಸಿತ್ತು. ನಿಯಮೋಲ್ಲಂಘನೆಯ ಮೂಲಕ ನೇಮಕಗೊಂಡಿದ್ದ ನೌಕರರನ್ನು ಕುಲಪತಿ ಕೆಲಸದಿಂದ ತೆಗೆದು ಹಾಕಿದ್ದರು. ಕಾನೂನು ಬದ್ಧವಾಗಿ ಅವರ ಮರು ನೇಮಕ ಸಾಧ್ಯವಿರಲಿಲ್ಲ. ಎಚ್‌.ಡಿ.ಕುಮಾರಸ್ವಾಮಿಯವರು ರಜೆಯಲ್ಲಿದ್ದ ಕುಲಪತಿಯನ್ನು ಕರೆಯಿಸಿಕೊಂಡು `ಎಲ್ಲರನ್ನೂ ಮರು ನೇಮಕ ಮಾಡಿ’ ಎಂದು ಆದೇಶಿಸಿದರು. ಕುಲಪತಿ ಅದು ನಿಯಮೋಲ್ಲಂಘನೆಯಾಗುತ್ತದೆ ಎಂದಾಗ ಮರುನೇಮಕಕ್ಕಾಗಿ ಆಗ್ರಹಿಸುತ್ತಿದ್ದವರನ್ನು ಉದ್ದೇಶಿಸಿ `ನಾನು ಹೇಳುತ್ತಿದ್ದೇನೆ. ನಿಮ್ಮ ಮರು ನೇಮಕ ಸಾಧ್ಯವಾಗದಿದ್ದರೆ ಉಳಿದವರೂ ವಿಶ್ವವಿದ್ಯಾಲಯಕ್ಕೆ ಬರದಂತೆ ಬೀಗ ಹಾಕಿ’ ಎಂದು ಆದೇಶಿಸಿದ್ದರು.

ಎನ್‌.ವೆಂಕಟಾಚಲ ಅವರು ಲೋಕಾಯುಕ್ತರಾಗಿದ್ದಾಗ ಸಾರಿಗೆ ಕಚೇರಿಯೊಂದಕ್ಕೆ ದಾಳಿ ನಡೆಸಿದ ಸಂದರ್ಭದಲ್ಲಿ ನಾಗರಿಕರೊಬ್ಬರು ಅಧಿಕಾರಿಗಳ ಪರವಾಗಿ ಮಾತನಾಡಿದಾಗ ಅವರನ್ನು ಜಿ.ರಮೇಶ್‌ ಎಂಬ ಲೋಕಾಯುಕ್ತ ಎಸ್‌.ಪಿ. ಮನಬಂದಂತೆ ಥಳಿಸಿದ್ದರು. ಇತ್ತೀಚೆಗೆ ಮಗನ ಕೊಲೆಯಿಂದ ದುಃಖ ಅನುಭವಿಸುತ್ತಿದ್ದ ಎಎಸ್‌ಐ ಒಬ್ಬರಿಗೆ ಡಿಸಿಪಿ ರವಿ ಥಳಿಸಿದ್ದು ಪತ್ರಿಕೆಗಳಲ್ಲಿ ವರದಿಯಾಗಿತ್ತು. ಈಗ ಮಾನವ ಹಕ್ಕು ಆಯೋಗವೂ ಡಿಸಿಪಿ ರವಿಯವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ. ಸೋನಿಯಾ ನಾರಂಗ್‌ ಎಂಬ ಪೊಲೀಸ್‌ ಅಧಿಕಾರಿ ತಮ್ಮ ಕೈಕೆಳಗಿನ ಅಧಿಕಾರಿಯೊಬ್ಬರಿಗೆ ಥಳಿಸಿದ್ದನ್ನೂ ನಾವೆಲ್ಲರೂ ಪತ್ರಿಕೆಗಳಲ್ಲಿ ಓದಿ ಮರೆತಿದ್ದೇವೆ.

ಈ ಎಲ್ಲಾ ಪ್ರಕರಣಗಳೂ ರಾಜಕಾರಣಿಗಳು ಮತ್ತು ಅಧಿಕಾರಿಗಳ `ತುಘಲಕ್‌ ಮನಸ್ಥಿತಿ’ಯ ಸ್ಯಾಂಪಲ್‌ಗಳು ಮಾತ್ರ.

***

ರಾಮಚಂದ್ರೇಗೌಡರ ಪ್ರಕರಣವನ್ನು ಸೂಕ್ಷ್ಮವಾಗಿ ನೋಡಿದರೆ ಅಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಷಯವಿರುವುದು ಬೇರೆಯೇ ಬಗೆಯಲ್ಲಿ. ಆಧುನಿಕ ಕಲೆ ಮತ್ತು ಕಲಾವಿದರ ಬಗ್ಗೆ ಸಚಿವರು ವ್ಯಕ್ತಪಡಿಸಿದ ಅಭಿಪ್ರಾಯವನ್ನು ಕಲಾವಿದರೊಬ್ಬರು ಸಭೆಯಲ್ಲೇ ವಿರೋಧಿಸಿದರು. ರಾಮಚಂದ್ರೇಗೌಡರಿಗೆ ಆಧುನಿಕ ಕಲೆಯ ಬಗ್ಗೆ ತಮ್ಮ ಸ್ವಂತ ಅಭಿಪ್ರಾಯವನ್ನು ಅದು ಯಾರಿಗೆ ಇಷ್ಟವಾಗದಿದ್ದರೂ ಹೇಳುವ ಹಕ್ಕಿದೆ. ಭಾಷಣಕ್ಕೆ ಅಡ್ಡಿಪಡಿಸಿದವರು ಸಚಿವರ ಈ ಮೂಲಭೂತ ಹಕ್ಕನ್ನು ಉಲ್ಲಂಘಿಸಿದರೆಂದೇ ಭಾವಿಸೋಣ. ಆದರೆ ಇದಕ್ಕೆ ಸಚಿವರು ನೀಡಿದ ಪ್ರತಿಕ್ರಿಯೆ ಕೆಲವು ಹೊಸ ಪ್ರಶ್ನೆಗಳಿಗೆ ಕಾರಣವಾಗುತ್ತದೆ. `ಇಲ್ಲಿ ಸರ್ಕಾರ ಮಾತನಾಡುತ್ತಿದೆ’ ಎಂದು ಸಚಿವರು ಹೇಳಿದರು. ಅಂದರೆ ಸಚಿವರು ಆಧುನಿಕ ಕಲೆ ಮತ್ತು ಕಲಾವಿದರ ಬಗ್ಗೆ ವ್ಯಕ್ತಪಡಿಸಿದ ಅಭಿಪ್ರಾಯಗಳು ಸಚಿವ ಸಂಪುಟದ ಅರ್ಥಾತ್‌ ಸರ್ಕಾರದ ಅಭಿಪ್ರಾಯವೇ? ಅಂದರೆ ಇದನ್ನು ಆಧುನಿಕ ಕಲೆ ಮತ್ತು ಕಲಾವಿದರ ಬಗೆಗಿನ ಸರ್ಕಾರದ ನೀತಿ ಎಂದು ಪರಿಗಣಿಸಬಹುದೇ? ತಮ್ಮ ಮಾತಿಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದವರನ್ನು `ಹೊರಗೆ ದಬ್ಬುವುದೂ’ ಈ ನೀತಿಯ ಭಾಗವೇ?

***

ಎಚ್‌.ಡಿ.ಕುಮಾರಸ್ವಾಮಿಯವರಿಂದ ಆರಂಭಿಸಿ ರಾಮಚಂದ್ರೇಗೌಡರ ತನಕದ ರಾಜಕಾರಣಿಗಳು ಮತ್ತು ಎಸ್‌ಪಿ ರಮೇಶ್‌ರಿಂದ ಆರಂಭಿಸಿ ಸೋನಿಯಾ ನಾರಂಗ್‌ ಅವರ ತನಕದ ಪೊಲೀಸ್‌ ಅಧಿಕಾರಿಗಳು ಒಂದು ಅಂಶವನ್ನಂತೂ ಸ್ಪಷ್ಟಪಡಿಸುತ್ತಿದ್ದಾರೆ. ಇವರಾರಿಗೂ ಪ್ರಜಾಸತ್ತೆಯ ಮುಖ್ಯ ಉಪಕರಣವಾಗಿರುವ ಭಿನ್ನಾಭಿಪ್ರಾಯಕ್ಕೆ ಬೆಲೆ ಕೊಡುವ ಮನಸ್ಸಿಲ್ಲ. ನಿಯಮದ ಬಲದ ಮೇಲೆ ನಂಬಿಕೆ ಇಲ್ಲ. ದಬ್ಬುವುದು, ಥಳಿಸುವುದರ ಮೂಲಕ ಆಳುವುದು ಇವರ ಆಡಳಿತ ವೈಖರಿ. ಇಲ್ಲಿಯ ತನಕ ಕರ್ನಾಟಕ ಬಿಹಾರವಾಗುತ್ತಿದೆ ಎಂಬ ಮಾತು ಕೇಳಿಬರುತ್ತಿತ್ತು. ಈಗಿನ ಸ್ಥಿತಿ ನೋಡಿದರೆ ಕರ್ನಾಟಕ 17ನೇ ಶತಮಾನದ ಫ್ರಾನ್ಸ್‌ನಂತಾಗುತ್ತಿದೆ ಎನಿಸುತ್ತದೆ. ಹದಿನಾಲ್ಕನೇ ಲೂಯಿಯ `ನಾನೇ ಸರ್ಕಾರ’ ಎಂಬ ಉದ್ಧಟತನದ ಪರಿಣಾಮ 1789ರಲ್ಲಿ ಫ್ರಾನ್ಸ್‌ ಹೊತ್ತಿ ಉರಿಯುವುದರಲ್ಲಿ ಕೊನೆಗೊಂಡಿತೆಂಬುದು ನಮಗೆ ನೆನಪಿರಬೇಕು.

ಚಿತ್ರಗಳು: ಮುರಳೀಧರ ರಾಥೋಡ್

Posted in ಒಂಟಿದನಿ (ಉದಯವಾಣಿ ಅಂಕಣ), ಲೇಖನಗಳು | 5 Comments